ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಸಂಘದ ಮನವಿ ಮೇರೆಗೆ ಪತ್ರಕರ್ತನ ಪತ್ನಿ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 1.30 ಲಕ್ಷ ರೂ ಪರಿಹಾರ ಮಂಜೂರು ಮಾಡಿದ್ದಾರೆ.
ಕಳೆದ ಹದಿನೈದು ವರ್ಷದಿಂದ ಹಲವು ವಿದ್ಯುನ್ಮಾನ ಮಾಧ್ಯಮ ಮತ್ತು ಪತ್ರಿಕೆಯಲ್ಲಿ ಕೆಲಸ ಮಾಡಿದ್ದ ವಿಶ್ವಾಸ ಭಾರದ್ವಾಜ್ ಅವರ ಪತ್ನಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು.
ಶಸ್ತ್ರಚಿಕಿತ್ಸೆಗಾಗಿ ಸುಮಾರು ಎರಡೂವರೆ ಲಕ್ಷ ಕ್ಕೂ ಹೆಚ್ಚು ವೆಚ್ಚ ಮಾಡಿಕೊಂಡು ತೀವ್ರ ಸಂಕಷ್ಟದಲ್ಲಿ ಸಿಲುಕಿದ್ದರು ಎಂಬುದನ್ನು ಧ್ಯಾನ್ ಸೇರಿದಂತೆ ಕೆಲ ಪತ್ರಕರ್ತ ಗೆಳೆಯರು ಕೆಯುಡಬ್ಲ್ಯೂಜೆ ಗಮನಕ್ಕೆ ತಂದಿದ್ದರು.
ಸಂಕಷ್ಟದಲ್ಲಿರುವ ಪತ್ರಕರ್ತ ವಿಶ್ವಾಸ್ ಭಾರದ್ವಾಜ್ ಅವರ ಚಿಕಿತ್ಸೆಗೆ ನೆರವಾಗುವಂತೆ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಮನವಿ ಮೇರೆಗೆ ಚಿಕಿತ್ಸೆಗಾಗಿ 1.30 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಮಂಜೂರು ಮಾಡಿದ್ದಾರೆ.
ಕೃತಜ್ಞತೆ: ಪತ್ರಕರ್ತನ ಪತ್ನಿಯ ಚಿಕಿತ್ಸೆಗಾಗಿ ಮಾನವೀಯ ದೃಷ್ಟಿಯಿಂದ ಪರಿಹಾರ ಮಂಜೂರು ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಕೃತಜ್ಞತೆಗಳನ್ನು ಸಲ್ಲಿಸಿದೆ.